ತುಮಕೂರು :
ಅಕಾಲಿಕ ಮಳೆಯಿಂದ ರದ್ದಾಗಿದ್ದ ಐತಿಹಾಸಿಕ ಪ್ರಸಿದ್ಧ ಗೂಳೂರು ಶ್ರೀ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವೈಭವಯುತವಾಗಿ ನಡೆಯಿತು.
ಬಲಿಪಾಢ್ಯಮಿಯಂದು ಆರಂಭವಾದ ಗೂಳೂರು ಗಣಪನ ಪೂಜಾ ಕೈಂಕರ್ಯಗಳು ಸಂಪೂರ್ಣಗೊಂಡು, ಸಕಲ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಗೂಳೂರು ಕೆರೆಯಲ್ಲಿ ವರ್ಣರಂಜಿತ ಸಿಡ್ಡಿಮದ್ದಿನ ಅಬ್ಬರದ ನಡುವೆ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.
ಎರಡು ದಿನಗಳ ಕಾಲ ನಡೆದ ಗೂಳೂರು ಗಣೇಶ ಜಾತ್ರೆಯಲ್ಲಿ ನಾಡಿನ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದು ಪುನೀತರಾದರು.
ಶನಿವಾರ ಸಂಜೆ 7 ಗಂಟೆಗೆ ಊರಿನ ಯಜಮಾನರ ಮನೆಯಿಂದ ನಂದಿಧ್ವಜ ಮತ್ತು ಕರಡಿ ವಾದ್ಯದೊಂದಿಗೆ ಗಣಪತಿ ದೇವಾಲಯಕ್ಕೆ ಕಳಸ ತಂದು ಮಹಾಗಣಪತಿಗೆ ಮಹಾ ಮಂಗಳಾರತಿ ನೆರವೇರಿಸಲಾಯಿತು.
ಹೊನ್ನೇನಹಳ್ಳಿಯ ಭೋಮಿ ಸಮುದಾಯ ಸೇರಿದಂತೆ ಗ್ರಾಮದ 18 ಕೋಮಿನ ಜನರು ಒಗ್ಗೂಡಿ ಮಹಾಗಣಪತಿಯನ್ನು ದೇವಾಲಯಲದ ಗೋಪುರದಿಂದ ಹೊರತಂದು ಸರ್ವಾಲಂಕೃತ ವಾಹನದಲ್ಲಿ ಕೂರಿಸಿ ಮಧ್ಯರಾತ್ರಿವರೆಗೂ ಗ್ರಾಮದ ರಾಜಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ನಂತರ ಭಾನುವಾರ ಮಧ್ಯಾಹ್ನದಿಂದ ನಂದಿ, ನವಿಲು, ಜಿರಾಫೆ, ಕವಾಡಿ ಡ್ಯಾನ್ಸ್, ನಾದಸ್ವರ, ಕರಡಿ ಮಜಲು, ನಾಸಿಕ್ ಡೋಲ್, ನಂದಿಕೋಲು, ಕೀಲು ಕುದುರೆ, ಬೊಂಬೆ ಕುಣಿತ, ವೀರಭದ್ರನ ಕುಣಿತ, ಡೊಳ್ಳುಕುಣಿತ, ಪೂಜಾಕುಣಿತ, ಸೋಮನ ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಹಾಗೂ ಆಕರ್ಷಕ ಬಾಣ ಬಿರುಸು, ಸಿಡಿಮದ್ದಿನ ಸದ್ದಿನೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಗಣೇಶಮೂರ್ತಿಯ ಮೆರವಣಿಗೆಯನ್ನು ನಡೆಸಲಾಯಿತು.
ಗಣೇಶಮೂರ್ತಿಯ ಮೆರವಣಿಗೆ ಸಾಗಿದ ದಾರಿಯುದ್ದಕ್ಕೂ ಗ್ರಾಮದ ಜನತೆ ಮತ್ತು ಭಕ್ತಾದಿಗಳು ವಿಘ್ನೇಶ್ವರಿಗೆ ಪೂಜೆ ಸಲ್ಲಿಸಿ ಧನ್ಯತೆ ಮೆರೆದರು. ವೈಭವೋಪೇತ ಮೆರವಣಿಗೆ ಮುಖೇನ ಗೂಳೂರು ಕೆರೆ ಬಳಿ ಸಾಗಿದ ಗಣೇಶಮೂರ್ತಿಯನ್ನು ಆಕರ್ಷಕ ಸಿಡ್ಡಿಮದ್ದನ್ನು ಸಿಡಿಸಿ ಸಂಭ್ರಮಿಸಿದ ನಂತರ ಕೆರೆಯಲ್ಲಿ ವಿಸರ್ಜಿಸಲಾಯಿತು.
ಗೂಳೂರು ಶ್ರೀ ಮಹಾಗಣಪತಿ ಭಕ್ತಮಂಡಳಿಯ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ವಿಸರ್ಜನಾ ಮಹೋತ್ಸವದಲ್ಲಿ ನಾಡಿನ ವಿವಿಧೆಡೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/01/Gulur-Ganesha-5-scaled-e1611554719163.jpg)