ಉದಯಪುರ:
ಹೊಲದಲ್ಲಿದ್ದ 8 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ರಾಜಸ್ತಾನದ ಉದಯಪುರದಲ್ಲಿ ಭಾನುವಾರ ನಡೆದಿದೆ. ಈ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಗ್ರಾಮಸ್ಥರು ತೀವ್ರವಾಗಿ ಪ್ರತಿಭಟನೆ ನಡೆಸಿದರು. ಭಾನುವಾರ ಸಂಜೆ 7:30 ರ ಸುಮಾರಿಗೆ ಬಾಲಕಿ ಒಬ್ಬಂಟಿಯಾಗಿ ಹೊಲಕ್ಕೆ ಹೋದಾಗ ಈ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿ ಹುಕಮ್ ಸಿಂಗ್ ಅವರು ಹೇಳುವ ಪ್ರಕಾರ, ಒಬ್ಬ ವ್ಯಕ್ತಿ ಆಕೆಯ ಬಳಿಗೆ ಬಂದು, ಆಕೆಯ ಬಾಯಿಯನ್ನು ಬಿಗಿದು, ಹತ್ತಿರದ ಪೊದೆಗಳಿಗೆ ಎಳೆದೊಯ್ದು, ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿ ಪರಾರಿಯಾಗಿದ್ದ, ನಂತರ ಪೊಲೀಸರು ಆತನನ್ನು ಬಂಧಿಸಿದರು. ಸಂಕಷ್ಟದಲ್ಲಿದ್ದ ಬಾಲಕಿ ಮನೆಗೆ ತಲುಪಿ ತನ್ನ ಕುಟುಂಬಕ್ಕೆ ಮಾಹಿತಿ ನೀಡಿದ್ದಾಳೆ. ಕೂಡಲೇ ಆಕೆಯನ್ನು ಮಹಾರಾಣಾ ಭೂಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸೋಮವಾರ ಬೆಳಿಗ್ಗೆ, ಹೆಚ್ಚಿನ ಸಂಖ್ಯೆಯ ಗ್ರಾಮಸ್ಥರು ದಬೋಕ್ ಪೊಲೀಸ್ ಠಾಣೆಯಲ್ಲಿ ಜಮಾಯಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಪ್ರತಿಭಟನಾಕಾರರು ಹೆದ್ದಾರಿಯ ಸರ್ವಿಸ್ ರಸ್ತೆಯನ್ನು ನಿರ್ಬಂಧಿಸುವ ಮೊದಲು ಪೊಲೀಸ್, ಖಾಸಗಿ ವಾಹನಗಳು ಮತ್ತು ಬಸ್ಗಳನ್ನು ಧ್ವಂಸಗೊಳಿಸಿದರು. ಇದರಿಂದಾಗಿ ಆ ಪ್ರದೇಶದಲ್ಲಿ ದೀರ್ಘ ಸಂಚಾರ ದಟ್ಟಣೆಗೆ ಕಾರಣವಾಯಿತು.
ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಿಸಲು ಮೂರು ಠಾಣೆಗಳ ಪೊಲೀಸರನ್ನು ನಿಯೋಜಿಸಲಾಗಿದ್ದು, ಜನಸಮೂಹವನ್ನು ಚದುರಿಸಲು ಸೌಮ್ಯ ಬಲಪ್ರಯೋಗ ಮಾಡಲಾಗಿದೆ. ಅಧಿಕಾರಿಗಳು ಇನ್ನೂ ಗ್ರಾಮಸ್ಥರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ. ಇನ್ನು ವಿಧಿವಿಜ್ಞಾನ ತಂಡಗಳು ಮತ್ತು ಶ್ವಾನ ದಳವು ಘಟನಾ ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಹತ್ತಿರದ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.








