ಬಳ್ಳಾರಿ :
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬಳ್ಳಾರಿಯಲ್ಲಿ ಕಾಂಗ್ರೆಸ್ನ ಸಂಸದ ಇ. ತುಕಾರಾಂ ಹಾಗೂ ಇಬ್ಬರು ಶಾಸಕರ ಮನೆಯ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶಾಸಕರಾದ ನಾರಾ ಭರತ್ ರೆಡ್ಡಿ ಮತ್ತು ಕಂಪ್ಲಿ ಗಣೇಶ ಮನೆಯ ಮೇಲೂ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಜೊತೆಗೆ ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ್ಗೂ ಇಡಿ ಶಾಕ್ ನೀಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ತುಕಾರಾಂ ಅವರ ಪಾತ್ರ ಇದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ತುಕಾರಾಂ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಸಂಡೂರಿನಲ್ಲಿರುವ ಸಂಸದ ತುಕಾರಾಂ ಮನೆಯಲ್ಲಿ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಆರೆಸ್ಟ್ ಮಾಡಲಾಗಿತ್ತು. ಅವರ ಕಚೇರಿ ಹಾಗೂ ಮನೆಗಳಲ್ಲಿ ವ್ಯಾಪಕವಾಗಿ ದಾಳಿ ನಡೆಸಿದ್ದ ಇಡಿ, ದಾಖಲೆಗಳ್ನು ಪರಿಶೀಲನೆಗೆ ಒಳಪಡಿಸಿತ್ತು. ಒತ್ತಡಕ್ಕೆ ಒಳಗಾದ ಬಳಿಕ ಅವರು ಸಚಿವ ಪದವಿಗೆ ರಾಜೀನಾಮೆ ನೀಡಿದ್ದರು. ಇತ್ತೀಚೆಗೆ ಅವರು ಬೇಲ್ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಸಂಸದ ತುಕಾರಾಂಗೆ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.