ಬೆಂಗಳೂರು:
ಬಿಜೆಪಿ ಶಾಸಕರ ಸಭಾತ್ಯಾಗದ ನಡುವೆ ಕೇಂದ್ರ ಸರ್ಕಾರದ ವಕ್ಪ್ ತಿದ್ದುಪಡಿ ಮಸೂದೆ ವಿರುದ್ಧ ರಾಜ್ಯ ಸರ್ಕಾರ ಬುಧವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.ಇಂದು ವಿಧಾಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ನಿರ್ಣಯವನ್ನು ಮಂಡಿಸಿದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿ, ಸಭಾತ್ಯಾಗ ಮಾಡಿತು.
“ಸಂವಿಧಾನದ ಮೂಲಭೂತ ತತ್ವಗಳನ್ನು ಉಲ್ಲಂಘಿಸುವ ನಿಬಂಧನೆಗಳನ್ನು ಒಳಗೊಂಡಿರುವ ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂತೆಗೆದುಕೊಳ್ಳುವ ಮೂಲಕ ದೇಶದ ಸರ್ವಾನುಮತದ ಅಭಿಪ್ರಾಯಗಳನ್ನು ಗೌರವಿಸಬೇಕು ಎಂದು ಈ ಸದನವು ಸರ್ವಾನುಮತದಿಂದ ಒತ್ತಾಯಿಸುತ್ತದೆ” ಎಂದು ಎಚ್ ಕೆ ಪಾಟೀಲ್ ಹೇಳಿದರು. ಬಿಜೆಪಿ ಶಾಸಕರು ಮಸೂದೆಗೆ ತಮ್ಮ ವಿರೋಧ ವ್ಯಕ್ತಪಡಿಸಿದರು ಮತ್ತು ಇದು “ಮಿತಿ ಮೀರಿದ ಓಲೈಕೆ” ಎಂದು ಟೀಕಿಸಿದರು.
“ನಾವು ಈ ನಿರ್ಣಯವನ್ನು ವಿರೋಧಿಸುತ್ತೇವೆ. ಈ ಸರ್ಕಾರ ಪಾಕಿಸ್ತಾನವನ್ನು ಬೆಂಬಲಿಸುತ್ತದೆ ಮತ್ತು ಇದು ಮುಸ್ಲಿಂ ತುಷ್ಟೀಕರಣದ ಪರಮಾವಧಿ” ಎಂದು ಬಿಜೆಪಿ ಶಾಸಕರೊಬ್ಬರು ಹೇಳಿದರು.”ವಕ್ಫ್ ಮಂಡಳಿಯ ಪರವಾಗಿ ಭೂ ದಾಖಲೆಗಳನ್ನು ಬದಲಾಯಿಸಿದ್ದರೂ ಆಡಳಿತಾರೂಢ ಕಾಂಗ್ರೆಸ್ ರೈತರ ನೋವಿಗೆ ಸ್ಪಂದಿಸುತ್ತಿಲ್ಲ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಆರೋಪಿಸಿದರು.
