ಬೆಂಗಳೂರು:
ಚುನಾವಣೆ ಸನಿಹದಲ್ಲಿರುವಾಗಲೆ ಪಕ್ಷಗಳಿಂದ ಸ್ಪರ್ಧಿಸಲು ಟಿಕೆಟ್ ಕೇಳಿದರೆ ನಿಮ್ಮ ಬಳಿ ಎಷ್ಟು ಕೋಟಿ ಹಣವಿದೆ ಎಂದು ಪಕ್ಷಗಳ ನಾಯಕರು ಕೇಳುತ್ತಿದ್ದಾರೆ .ಈ ಪ್ರವೃತ್ತಿ ರಾಷ್ಟ್ರೀಯ ಪಕ್ಷಗಳನ್ನು ಸಹ ಬಿಟ್ಟಿಲ್ಲ ಎಂದು ನಿರಾಶೆಗೊಳಗಾದ ಟಿಕೆಟ್ ಆಕಾಂಕ್ಷಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಇದರಿಂದ ಬೇಸರಗೊಂಡು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ತೀ.ನಾ. ಶ್ರೀನಿವಾಸ್ ಹೇಳಿದರು.
ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವವರಿಂದ ಪಕ್ಷದ ಮುಖಂಡರು ಹಣವನ್ನು ಮಾತ್ರ ನಿರೀಕ್ಷಿಸುತ್ತಿದ್ದಾರೆ. ಗಂಟು ನೋಡುತ್ತಾರೆಯೇ ವಿನಾ ಪ್ರಾಮಾಣಿಕತೆಗೆ ಬೆಲೆ ನೀಡುತ್ತಿಲ್ಲ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷ ಪ್ರತಿಪಕ್ಷವಾಗಿ ಸಂಘಟಿತವಾಗಿ ಕೆಲಸ ಮಾಡದ ಕಾರಣ ತಾವು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಕಾಂಗ್ರೆಸ್ ಜಿಲ್ಲಾ ಮಾಜಿ ಅಧ್ಯಕ್ಷ ಹಾಗೂ ಮಲೆನಾಡು ರೈತ ಹೋರಾಟ ಸಮಿತಿ ಪ್ರಮುಖ ತಿ ನಾ ಶ್ರೀನಿವಾಸ್ ಅವರು ಘೋಷಿಸಿದರು.
ಕಾಂಗ್ರೆಸ್ ತೊರೆದರೂ ಬೇರೆ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಸಾಗರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ ಎಂದರು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಕೇವಲ ಹಣವಿದ್ದವರಿಗೆ ಮಾತ್ರ ಮಣೆ ಹಾಕುತ್ತಿದೆ. ಕಡಿಮೆ ಜನಸಂಖ್ಯೆ ಇರುವ ಸಮುದಾಯಗಳಿಗೆ, ಹಣವಿಲ್ಲದವರಿಗೆ ಬೆಲೆ ನೀಡುವುದಿಲ್ಲ. ಎಲ್ಲಾ ಪಕ್ಷಗಳು ಚುನಾವಣೆಯನ್ನು ವ್ಯಾಪಾರ ಮಾಡಿಕೊಂಡಿವೆ ಎಂದು ಆರೋಪಿಸಿದರು.