ಬೆಂಗಳೂರು
ಜಾತ್ಯಾತೀತ ಜನತಾದಳ ಪಕ್ಷ ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಈ ಮೈತ್ರಿಯು ಇದೀಗ ಜೆಡಿಎಸ್ ಪಕ್ಷಕ್ಕೆ ಸಂಕಷ್ಟವನ್ನು ಎದುರು ಮಾಡುತ್ತಿದೆ.
ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಅಸಮಾಧಾನಗೊಂಡಿರುವ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಮುಖಂಡರು ಇದೀಗ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.ನಗರದ ಕೆಕೆ ಗೆಸ್ಟ್ ಹೌಸ್ ನಲ್ಲಿ ನಿನ್ನೆ ಜೆಡಿಎಸ್ ಅಲ್ಪಸಂಖ್ಯಾತ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ಮುಸ್ಲಿಂ ಮುಖಂಡರು ಜೆಡಿಎಸ್ ತೊರೆಯಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಏತನ್ಮಧ್ಯೆ, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ ಝಡ್ ಜಮೀರ್ ಅಹಮದ್ ಖಾನ್ ಅವರು ಮಾತನಾಡಿ, ಮುಸ್ಲಿಮರ ಬೆಂಬಲದಿಂದ ರಾಜ್ಯದಲ್ಲಿ ಜೆಡಿಎಸ್ 19 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇಲ್ಲದಿದ್ದರೆ ಪಕ್ಷವು ಐದು ಅಥವಾ ಆರು ಸ್ಥಾನಗಳನ್ನಷ್ಟೇ ಗೆಲ್ಲುತ್ತಿದ್ದು. ಮುಸ್ಲಿಂ ಮತದಾರರಿಲ್ಲದಿದ್ದರೆ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಸೋಲಿನ ರುಚಿ ಅನುಭವಿಸುತ್ತಿದ್ದರು ಎಂದು ಹೇಳಿದ್ದಾರೆ.
![](https://prajapragathi.com/wp-content/uploads/2023/09/jds.jpg)