ಹುಬ್ಬಳ್ಳಿ
ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ಸಂಬಂಧ ಜೆಡಿಎಸ್ ಬಿಜೆಪಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು (ಅಕ್ಟೋಬರ್ 21) ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ್ದಾರೆ.
ಸಿಪಿ ಯೋಗೇಶ್ವರ್ ಅವರು ವಿಧಾನ ಪರಿಷತ್ನ ನಾಮನಿರ್ದೇಶಿತ ಬಿಜೆಪಿ ಸದಸ್ಯರಾಗಿದ್ದು, ಈ ಬಾರಿ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಜೆಡಿಎಸ್ ಕ್ಷೇತ್ರವನ್ನು ಬಿಟ್ಟುಕೊಡದಿರಲು ನಿರ್ಧರಿಸಿದೆ. ಅಲ್ಲದೇ ಹೈಕಮಾಂಡ್ ಸಹ ಜೆಡಿಎಸ್ ಕ್ಷೇತ್ರವಾಗಿದ್ದರಿಂದ ಅವರಿಗೆ ಬಿಟ್ಟುಕೊಟ್ಟಿದೆ. ಇನ್ನು ಜೆಡಿಎಸ್ ಚಿಹ್ನೆಯಿಂದ ಸ್ಪರ್ಧೆ ಮಾಡುವಂತೆ ಕುಮಾರಸ್ವಾಮಿ ಸಹ ಸಿಪಿ ಯೋಗೇಶ್ವರ್ಗೆ ಆಫರ್ ನೀಡಿದ್ದರು. ಆದ್ರೆ, ಸಿಪಿ ಯೋಗೇಶ್ವರ್ ಜೆಡಿಎಸ್ನಿಂದ ಸ್ಪರ್ಧಿಸಲು ನಿರಾಕರಿಸಿದ್ದು, ಇದೀಗ ಬಿಜೆಪಿಯ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಖುದ್ದು ರಾಜೀನಾಮೆ ಪತ್ರ ಬರೆದು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗೇಶ್ವರ್, ಚನ್ನಪಟ್ಟಣ ಉಪಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವೆ. ಈವರೆಗೆ ನಾನು ಯಾರೊಬ್ಬರ ಜೊತೆಗೂ ಸಂಪರ್ಕ ಮಾಡಿಲ್ಲ. ಸ್ವಇಚ್ಛೆಯಿಂದ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಉತ್ಸುಕನಾಗಿದ್ದೇನೆ. ಬಿಜೆಪಿ ನಾಯಕರು ನನಗೆ ಅವಕಾಶ ಮಾಡಿಕೊಡಬೇಕು. ನಾಳೆ ಏನಾಗುತ್ತದೆ ಎಂದು ಹೇಳಲು ಆಗಲ್ಲವೆಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.